Sunday, February 10, 2013

ಧಾರವಾಡ ಸಾಹಿತ್ಯ ಸಂಭ್ರಮವೆಂಬ ದಿಗ್ಭ್ರಮೆ

                                  

ಇದೇ (ಜನವರಿ, ೨೦೧೩) ೨೫,೨೬,೨೭ರಂದು  ಧಾರವಾಡ ಸಾಹಿತ್ಯ ಸಂಭ್ರಮ ಎಂಬ ನೋಂದಾಯಿತ ಸಂಸ್ಥೆಯೊಂದು ಆಯೋಜಿಸಿರುವ ಮೂರು ದಿನಗಳ ಸಾಹಿತ್ಯ ಸಂಭ್ರಮದಲ್ಲಿ ವಿಶೇಷ ಆಮಂತ್ರಿತನಾಗಿ ನಾನು ಪಾಲ್ಗೊಳ್ಳಬೇಕೆಂದು ಕೋರಿ ಶ್ರೀ ಗಿರಡ್ಡಿ ಗೋವಿಂದರಾಜ ಅವರು ಕಳಿಸಿದ ಮುದ್ರಿತ ಓಲೆ ತಲುಪಿದಾಗ ಕಳೆದ ಮೂರು ದಶಕಗಳಿಂದ ಧಾರವಾಡದ ಸಾಹಿತ್ಯಿಕ ಸಾಂಸ್ಕೃತಿಕ ಲೋಕವನ್ನು ಬಲ್ಲ ನನಗೆ ಸ್ವಲ್ಪ ವಿಚಿತ್ರವೆನಿಸಿತು. ಅವರ ಆತ್ಮೀಯ ಆಹ್ವಾನಕ್ಕೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತಲೇ ಸದರಿ ಸಮಾವೇಶದಲ್ಲಿ ಪಾಲ್ಗೊಳ್ಳಲು ನಾನು ಇಚ್ಛಿಸುವದಿಲ್ಲವೆಂದೂ, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧನಸಹಾಯ ಪಡೆದಿರುವ ಈ ಮತ್ತು ಇಂಥ ಯಾವುದೇ ಸಾಹಿತ್ಯಿಕ ಸಾಂಸ್ಕೃತಿಕ ಸಮಾವೇಶಗಳು ಸಾರ್ವಜನಿಕ ಡೊಮೈನ್ ನಲ್ಲಿ ಇರುವಂಥವಾದ್ದರಿಂದ ಇದರಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ್ದರ ಬಗ್ಗೆ ನನಗೆ ವಿಷಾದವೇಕಿಲ್ಲ ಎಂಬುದನ್ನು ಸಾರ್ವಜನಿಕವಾಗಿಯೇ ಹೇಳಬಹುದೆನ್ನಿಸುತ್ತದೆ ಎಂದೂ ಭಾವಿಸಿ ನಾನು ಗಿರಡ್ಡಿಯವರಿಗೆ ಒಂದು ಬಹಿರಂಗ ಪತ್ರವನ್ನೂ ಬರೆದೆ.

ಗಿರಡ್ಡಿಯವರು ತಮ್ಮ ಪತ್ರದಲ್ಲಿ ಸರಿಯಾಗಿಯೇ ಹೇಳಿರುವಂತೆ ಧಾರವಾಡ ನಗರ ಅನೇಕ ಜನ ಸಾಹಿತಿ-ಕಲಾವಿದರ ನೆಲೆ, ಇಂದಿಗೂ ತನ್ನ ಹಿರಿಯ ಪರಂಪರೆಯನ್ನು ಕ್ರಿಯಾಶೀಲವಾಗಿ ಮುಂದುವರಿಸಿಕೊಂಡು ಬಂದಿರುವ ಊರು. ಆಯ್ದ ಕೆಲವರನ್ನು ಒಳಗೊಂಡು ಕೆಲವರನ್ನು ಹೊರಗಿಟ್ಟು ಅದು ಇಡೀ ಧಾರವಾಡದ ಪ್ರಾತಿನಿಧಿಕ ಸಂಸ್ಥೆ ಅಥವಾ ಕಾರ್ಯಕ್ರಮ ಎಂಬಂತಿದ್ದ ಈ ಪ್ರಯತ್ನ ಸ್ವಾಭಾವಿಕವಾಗಿಯೇ ಹಲವು ಪ್ರಶ್ನೆಗಳಿಗೆ ಜನ್ಮವಿತ್ತಿದೆ. ಧಾರವಾಡದ ವಿಶಿಷ್ಟವೂ ಶ್ರೀಮಂತವೂ ಆದ ಪರಂಪರೆಯ ವಾರಸುದಾರಿಕೆ ಯಾವೊಬ್ಬ ವ್ಯಕ್ತಿ, ಮನೆತನ,ಗುಂಪು, ಜಾತಿ,ಪಂಥಕ್ಕೆ ಸೇರಿದ್ದಲ್ಲ. ವಾಸ್ತವವಾಗಿ ಅದು ಬರಿದೇ ಧಾರವಾಡಕ್ಕೆ ಸೀಮಿತವಾದದ್ದೂ ಅಲ್ಲ. ಧಾರವಾಡ ನೆಲದಿಂದ ಹೊಮ್ಮಿದ  ಸಾಹಿತ್ಯ,ಸಂಗೀತ,ವಿಮರ್ಶೆ,ಚಿತ್ರಕಲೆ,ರಂಗಪ್ರಯೋಗಗಳೇ ಮೊದಲಾದ ಸಮೃದ್ಧಿಯನ್ನು,ಅದರ ಜೊತೆಜೊತೆಗೇ ಇಲ್ಲಿಯ ಸ್ನೇಹ,ಪ್ರೀತಿ,ಸಂಘರ್ಷ, ಪ್ರತಿಭಟನೆ, ಹೊಸತನದ ಹುಡುಕಾಟಗಳ ವಿಶಿಷ್ಟ ಪರಂಪರೆಯ ಕುರಿತು ಹೆಮ್ಮೆ-ಮೆಚ್ಚುಗೆಗಳನ್ನು ಇಟ್ಟುಕೊಂಡವರು ಧಾರವಾಡದ ಹೊರಗೂ ಇದ್ದಾರೆ. ಜೈಪುರದ ಸಾಹಿತ್ಯಹಬ್ಬದಿಂದ ಪ್ರೇರಿತರಾಗಿ ತಾವು "ಇನ್ನೊಂದು ಹೊಸ ಪ್ರಯೋಗ" ವೆಂದು ವ್ಯಾಖ್ಯಾನಿಸಿಕೊಂಡಿರುವ ಸಾಹಿತ್ಯ ಸಂಭ್ರಮದ ಒಟ್ಟಾರೆ ಸ್ವರೂಪ, ಧಾಟಿ ಧೋರಣೆ ಮತ್ತು ವಿಶೇಷವಾಗಿ ಅದರ ನಿಯಮ ನಿಬಂಧನೆಗಳು ಅಂಥ ಹಲವಾರು ಜನರನ್ನು ನಿರಾಶೆಗೊಳಿಸಿವೆ. ಅಂತರ್ಜಾಲ ತಾಣಗಳಲ್ಲಿ, ಬ್ಲಾಗ್ ಗಳಲ್ಲಿ, ದಿನಪತ್ರಿಕೆಗಳಲ್ಲಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜೋಗಿ, ಜಿ.ಎನ್.ಮೋಹನ್, ಕೆ.ವಿ.ತಿರುಮಲೇಶ್, ರಹಮತ್ ತರೀಕೆರೆ, ಅಶೋಕವರ್ಧನ್, ಹೆಚ್.ಎಸ್.ರಾಘವೇಂದ್ರರಾವ್, ಕುಂ.ವೀರಭದ್ರಪ್ಪ, ಎಚ್.ಎಸ್.ಅನುಪಮಾ,ಬರಗೂರು ರಾಮಚಂದ್ರಪ್ಪ ಮುಂತಾದವರು ವ್ಯಕ್ತಪಡಿಸಿದ ಪ್ರತಿಕ್ರಿಯೆಗಳು ಆ ನಿರಾಶೆಯನ್ನು ಶಕ್ತವಾಗಿಯೇ ಅಭಿವ್ಯಕ್ತಿಸಿವೆ. ಧಾರವಾಡದಂಥ ಅನೌಪಚಾರಿಕವೂ ಆತ್ಮೀಯವೂ ಆದ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಗಳ ಪರಂಪರೆಗೆ ವ್ಯತಿರಿಕ್ತವಾದ ವಿಲಕ್ಷಣ ನಿಯಮಾವಳಿಗಳನ್ನು ಓದಿ ನಿರಾಶೆಗೊಂಡವರಲ್ಲಿ ನಾನೂ ಒಬ್ಬ."ಕಾರ್ಪೊರೇಟ್ ಜಗತ್ತು ಮತ್ತು ಕನ್ನಡ ಸಾಹಿತ್ಯ" ಎಂಬ ಒಂದು ಗೋಷ್ಠಿಯನ್ನೂ ಒಳಗೊಂಡಿರುವ ಈ ಸಮಾವೇಶ ವಾಸ್ತವವಾಗಿ ಕನ್ನಡ ಸಾಹಿತ್ಯ ಸೃಜನೆ-ವಿಮರ್ಶೆಗಳ ಲೋಕದ ಕಾರ್ಪೊರೇಟೀಕರಣದಂತೇ ಭಾಸವಾಗುತ್ತಿದೆ. ಇದನ್ನು ಕನ್ನಡದ ಮನಸು ಸೈರಿಸಿಕೊಳ್ಳುತ್ತದೆಂದು ನನಗನಿಸುವದಿಲ್ಲ.

                                  

ಸಾಹಿತಿ ಸಾಹಿತಿಗಳ ನಡುವೆ ಮತ್ತು ಲೇಖಕ ಓದುಗರ ನಡುವೆ ಆತ್ಮೀಯ ಸಂಬಂಧವನ್ನು ಬೆಳೆಸುವ ಉದ್ದೇಶವೂ ಈ ಸಂಭ್ರಮಕ್ಕಿದೆ ಎಂದು ಆಯೋಜಕರು ಹೇಳಿದ್ದಾರೆ. ಸರಿಯೇ. ಆದರೆ ಸಂಘಟಕರು ಮತ್ತು ಸಾವಿರದೈನೂರು ರೂಪಾಯಿ ಪ್ರತಿನಿಧಿ ಶುಲ್ಕ ಪಾವತಿಸಿ ನೋಂದಾಯಿಸಿಕೊಂಡ ಪ್ರತಿನಿಧಿಗಳ ನಡುವೆಯೂ ಒಂದು ಆತ್ಮೀಯ ಸಂಬಂಧ ಇರಬೇಕೆಂಬುದು ಅವರಿಗೆ ತೋಚಿರಲಿಲ್ಲವೆಂಬುದಕ್ಕೆ ನಿಯಮ ನಿಬಂಧನೆಗಳ ಕುರಿತ ಅವರ ಒಕ್ಕಣೆಯೇ ಸಾಕ್ಷಿ. "ಮೊದಲೀಗೆ ಅಲ್ಲಮ ಪ್ರಭುವಿಗೆ ಶರಣಾರ್ಥಿ ಕೂಡಿ ಕುಂತ ಜನಕೆಲ್ಲ ನಮ್ಮ ನಮನ" ಎಂದು ಕಂಬಾರರ ಒಂದು ಹಾಡಿನಲ್ಲಿ ಬರುವಂತೆ ರಂಗದ ಮೇಲೆ ದೇವಾಧಿದೇವತೆಗಳ ಪಾತ್ರಗಳೂ ಮೊದಲಿಗೆ ದೈವಕ್ಕೆ ಅಂದರೆ ಎದುರಿಗೆ ಕುಳಿತ ಪ್ರೇಕ್ಷಕ ಗಣಕ್ಕೆ ಕೈ ಮುಗಿದು ಆಟ ಪ್ರಾರಂಭಿಸುವ ಜಾನಪದೀಯ ಪರಂಪರೆ ನಮ್ಮದು. ಇವರಿಗೆ ಮಾದರಿಯಾದ ಜೈಪುರ ಲಿಟರರಿ ಫೆಸ್ಟಿವಲ್ ನಂಥವುಗಳಲ್ಲಿ ಅಂಥ ನಿಯಮ ನಿಬಂಧನೆಗಳು ಇರಲು ಕಾರಣವಾದ ಹಿನ್ನೆಲೆಗಳಿವೆ. ಈ ನೋಂದಾಯಿತ ಸಂಸ್ಥೆಯ ಗೌರವಾಧ್ಯಕ್ಷರುಗಳು, ಅಧ್ಯಕ್ಷರು, ಸದಸ್ಯರು ಧಾರವಾಡದಲ್ಲಿ ಹಲವಾರು ದಶಕಗಳಿಂದ ಇದ್ದವರು. ಸಾವಿರಾರು ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವವರು. ಎಷ್ಟು ಕಾರ್ಯಕ್ರಮಗಳಲ್ಲಿ ಅನುಚಿತವಾದ, ಅಸಭ್ಯವಾದ ವರ್ತನೆಯನ್ನು ೈವರು ಕಂಡಿದ್ದಾರೆ? ಅವಮಾನಕರ, ಅಪಕೀರ್ತಿಗೊಳಿಸುವ, ಹಕ್ಕುಚ್ಯುತಿಗೊಳಿಸುವ, ಅಸಭ್ಯ, ಕಾನೂನುಬಾಹಿರ ವಿಷಯಗಳನ್ನು, ಮಾಹಿತಿಗಳನ್ನು ಕರಪತ್ರಗಳ ಮೂಲಕ ಹಂಚಿದ್ದನ್ನು ನೋಡಿದ್ದಾರೆ?? ಪ್ರಚಾರ ಸಾಮಗ್ರಿಯನ್ನು ಕಾರ್ಯಕ್ರಮದ ಸ್ಥಳ,ಪ್ರದೇಶ,ಸಭಾಂಗಣದಲ್ಲಿ ತಂದದ್ದನ್ನು ಅನುಭವಿಸಿದ್ದಾರೆ? ಕಾರ್ಯಕ್ರಮದ ಸ್ಥಳದಲ್ಲಿ ಆಸ್ತಿ-ಪಾಸ್ತಿಗಳಿಗೆ ಯಾರಾದರೂ ಧಕ್ಕೆ ಉಂಟು ಮಾಡಿದ ಎಷ್ಟು ಉದಾಹರಣೆಗಳು ಧಾರವಾಡದಂಥ ಒಂದು ಸಭ್ಯರ ಊರ ಪರಂಪರೆಯಲ್ಲಿವೆ? ಕಾರ್ಯಕ್ರಮದ ಸ್ಥಳದಲ್ಲಿ ಮದ್ಯ ಮಾದಕವಸ್ತುಗಳನ್ನು ತಂದು ಸೇವಿಸುವಂಥ ಅರಾಜಕರೇ ಧಾರವಾಡದ ಮಂದಿ? ಕಾರ್ಯಕ್ರಮದ ಪ್ರವೇಶಸ್ಥಳ/ಸಭಾಂಗಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರಗಳನ್ನು ತರಬಾರದೆಂಬ ನಿಬಂಧನೆಯಂತೂ ಇವೆಲ್ಲವುಗಳ ಕಳಶ. ಇಂಥದೇನೂ ಎಂದೂ ಇಲ್ಲದ ಧಾರವಾಡದಲ್ಲಿ ಯಾಕಾಗಿ ಇಂಥ ಡಿಫೆನ್ಸಿವ್ ಕವಚದ ಅಗತ್ಯಇವರಿಗೆ ಕಂಡಿತು? ಏಕೆ ಇಂಥ ಹಾಸ್ಯಾಸ್ಪವ ಒಕ್ಕಣೆಯಿಂದ ಧಾರವಾಡವನ್ನು ಅವಮಾನಿಸಿದ್ದಾರೆ? ಧಾರವಾಡದಲ್ಲಿ ಪ್ರಗತಿಪರ ಯುವಕರು ಈ ಕುರಿತು ತಮ್ಮ ನೋವು, ವಿರೋಧ ವ್ಯಕ್ತಗೊಳಿಸಿದಾಗ ಸಂಘಟಕರು ಮಾಡಬಹುದಾಗಿದ್ದ ಕನಿಷ್ಟತಮ ಕೆಲಸವೆಂದರೆ ಆ ಅಚಾತುರ್ಯಕ್ಕಾಗಿ ಕ್ಷಮೆ ಕೇಳುವದು. ಆದರೆ ನಿಯಮ ನಿಬಂಧನೆಗಳನ್ನು ಗಂಭೀರವಾಗಿ ತೆಗೆದುಕೊಂಡು ಅವುಗಳನ್ನು ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬಂತೆ ಸಂಘಟಕರು ಪತ್ರಿಕೆಗಳಿಗೆ ಹೇಳಿಕೆ ಕೊಟ್ಟ ಕುರಿತು ತಮ್ಮ ನೋವನ್ನು ಪ್ರಗತಿಪರ ಮನೋಭಾವನೆಯ ಯುವಬರಹಗಾರರು ನನ್ನೊಂದಿಗೆ ಹಂಚಿಕೊಂಡರು.

ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪಡೆದು ಕಡ್ಡಾಯವಾಗಿ ಕೊರಳಲ್ಲಿ ಧರಿಸಲು ನಿರ್ಬಂಧಿತರಾದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾಷಣಕಾರರಲ್ಲ, ಅವರಿಗೆ ರಾತ್ರಿ ಭೋಜನ ವ್ಯವಸ್ಥೆ ಇರುವದಿಲ್ಲ ಅದನ್ನು ಅವರು ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕು, ಪರ ಊರಿನ ಪ್ರತಿನಿಧಿಗಳು ತಾವು ನಿಗದಿಗೊಳಿಸಿದ  ಹೊಟೆಲ್ ಗಳ ಲಿಸ್ಟ್ ನಲ್ಲಿರುವ ಹೊಟೆಲ್ ಗಳ ವ್ಯವಸ್ಥಾಪಕರನ್ನು ಕಂಡು ತಮ್ಮ ವಸತಿ ವ್ಯವಸ್ಥೆಯನ್ನೂ ತಾವೇ ಮಾಡಿಕೊಳ್ಳಬೇಕು, ಪ್ರತಿನಿಧಿಗಳಿಗೆ ವಾಹನ ಸೌಕರ್ಯ ಇರುವದಿಲ್ಲ ತಮ್ಮ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳಬೇಕು....! ಇಂಥ ವರಸೆಯ ಸ್ವಾಗತ ಎಂಥ ಆತ್ಮೀಯತೆಯನ್ನು ಮೂಡಿಸಬಲ್ಲದೋ ಗೊತ್ತಿಲ್ಲ.

ಸಾಹಿತ್ಯದಲ್ಲಿ ಸಂಭ್ರಮದ ಒಂದು ಆಯಾಮ ಇದ್ದೇ ಇದೆ. ಅದರೆ ಇಲ್ಲಿ ಹಣದ, ಶ್ರೇಷ್ಠತೆಯ, ಅಹಮಿಕೆಯ ಧ್ವನಿಗಳು ಢಾಳಾಗಿ ಕಾಣುತ್ತಿವೆ ಎನ್ನಿಸುತ್ತಿದೆ. ಸಂಭ್ರಮಿಸಲು ತಕ್ಕುದಾದ ಮನಸ್ಥಿತಿಯೂ ಸನ್ನಿವೇಶವೂ ಇರಬೇಕಾಗುತ್ತದೆ. ನಮ್ಮ ಇಂದಿನ ಸನ್ನಿವೇಶ ಹಾಗಿದೆ ಎಂದು ಅನ್ನಿಸುತ್ತಿಲ್ಲ. ಇಂಥದರಲ್ಲಿ ಇವರು ಸಂಭ್ರಮಿಸಬಯಸುತ್ತಿದ್ದಾರೆ. ಅವರ ಸಂಭ್ರಮಕ್ಕೆ ಶುಭವಾಗಲಿ. ಆದರೆ ಹಲವು ಪ್ರಶ್ನೆಗಳು ಬಾಕಿ ಉಳಿಯುತ್ತವೆ, ಅವರ ಉತ್ತರದ ನಿರೀಕ್ಷೆಯಲ್ಲಿ..!






1 comment:

  1. ಇದು ಸಾಹಿತ್ಯ ಸಂಭ್ರಮವಲ್ಲ; ಸಾಹಿತ್ಯವ್ಯಾಪಾರದ ಸಂಭ್ರಮ!

    ReplyDelete